
ತಿರುವನಂತಪುರಂ: ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಖಾಸಗಿ ಟ್ಯೂಷನ್ ಸೆಂಟರ್ ಬಳಿ ನಡೆದ ವಿದ್ಯಾರ್ಥಿಗಳ ನಡುವಿನ ಮಾರಾಮಾರಿಯಲ್ಲಿ ಗಾಯಗೊಂಡಿದ್ದ 10ನೇ ತರಗತಿ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಮೃತ ಬಾಲಕನನ್ನು ಮಹಮ್ಮದ್ ಶಹಬಾಸ್ (16) ಎಂದು ಗುರುತಿಸಲಾಗಿದೆ. ಫೆಬ್ರವರಿ 23ರಂದು ಟ್ಯೂಷನ್ ಸೆಂಟರ್ನಲ್ಲಿ ನಡೆದ ಬೀಳ್ಕೊಡುಗೆ ಪಾರ್ಟಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ಸಂಭವಿಸಿತು. ಈ ವೇಳೆ ಶಹಬಾಸ್ ತಲೆಗೆ ತೀವ್ರ ಪೆಟ್ಟಾಗಿತ್ತು. ತಕ್ಷಣವೇ ಆತನನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಿಸದೆ ಮಾರ್ಚ್ 1ರ ಮುಂಜಾನೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವರ ವಿರುದ್ಧ ಕೊಲೆ ಆರೋಪ ದಾಖಲಿಸಲಾಗಿದೆ. ಅವರನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿಯವರು, ವಿದ್ಯಾರ್ಥಿಯ ಸಾವಿಗೆ ಸಂತಾಪ ಸೂಚಿಸಿದ್ದು, ಈ ಸಂಬಂಧ ಇಲಾಖಾ ತನಿಖೆ ಆರಂಭಿಸುವಂತೆ ಶಿಕ್ಷಣ ನಿರ್ದೇಶಕರಿಗೆ ಆದೇಶ ನೀಡಿದ್ದಾರೆ.
ಫೆಬ್ರವರಿ 23ರಂದು, ಮಹಮ್ಮದ್ ಶಹಬಾಸ್ ಸೇರಿದಂತೆ ಸುಮಾರು 15 ವಿದ್ಯಾರ್ಥಿಗಳ ಗುಂಪು ಹಾಗೂ ಮತ್ತೊಂದು ಗುಂಪಿನ ನಡುವೆ ಗಲಾಟೆ ನಡೆದಿದೆ. ಪ್ರಾರಂಭದಲ್ಲಿ ಶಹಬಾಸ್ಗೆ ಗಂಭೀರ ಗಾಯಗಳಾಗಿರುವುದು ಸ್ಪಷ್ಟವಾಗಿರಲಿಲ್ಲ. ತಾಮರಶ್ಶೇರಿ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಆದಾಗ್ಯೂ, ಮನೆಗೆ ಹಿಂತಿರುಗಿದ ಬಳಿಕ, ಅವನ ಆರೋಗ್ಯ ಕ್ಷೀಣಿಸಿ ಕೋಮಾಗೆ ಜಾರಿದ ಎಂದು ಪೊಲೀಸರು ತಿಳಿಸಿದ್ದಾರೆ.